*ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ನಾಳೆಯಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಹರಿಸಲಾಗುತ್ತಿದ್ದು, ಒಟ್ಟು ೬ ದಿನಗಳವರೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ನಾಳೆ ಗುರುವಾರದಂದು ಸಂಜೆ ೬ ಗಂಟೆಯಿಂದ ಘಟಪ್ರಭಾ ನದಿಗೆ ನೀರು ಹರಿಸಲಾಗುತ್ತಿದ್ದು, ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು ಹರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.
ದಿನಾಲು ೪ ಸಾವಿರ ಕೂಸೆಕ್ಸ್ ನೀರನ್ನು ಬಿಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಕೋಟಬಾಗಿ, ಕಲಮಡ್ಡಿ ಮತ್ತು ರಾಮಲಿಂಗೇಶ್ವರ ಏತ ನೀರಾವರಿ ಸೇರಿ ನೀರನ್ನು ಬಿಡಲು ಕ್ರಮ ಕೈಗೊಂಡಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ಅಲ್ಲದೇ ಏಪ್ರಿಲ್ ೧ ರಿಂದ ಜಾರಿಗೆ ಬರುವಂತೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಬಳಕೆಗಾಗಿ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ೧೦ ದಿನಗಳವರೆಗೆ ನೀರನ್ನು ಹಿಡಕಲ್ ಜಲಾಶಯದಿಂದ ಬಿಡುಗಡೆ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದು, ಕೇವಲ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಅನಗತ್ಯವಾಗಿ ನೀರು ಪೋಲಾಗದಂತೆ ಸಾರ್ವಜನಿಕರು ಸಹಕರಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೋರಿಕೊಂಡಿದ್ದಾರೆ.