Belagavi NewsBelgaum NewsKannada NewsKarnataka NewsNationalPolitics

*ಶೆಡ್ ನಲ್ಲಿ ವಾಸುತ್ತಿದ್ದವರಿಗೆ ಆದ್ಯತೆ ಮೇರೆಗೆ ಮನೆ ಮಂಜೂರು: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗದ ಚವ್ಹಾಟ ಗಲ್ಲಿಯಲ್ಲಿ ನಾಲ್ವರು ಸಜೀವ ದಹನ ವಾಗಿದ್ದು, ಘಟನಾ ಸ್ಥಳಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಕಿ ಅವಘಡದಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡಿರುವ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಕಿ ಅವಘಡದಿಂದ ಆಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಅವರ ವರದಿ ಏನು ಬರುತ್ತೆ ನೋಡಿಕೊಂಡು, ಕುಟುಂಬಕ್ಕೆ ಯಾವ ರೀತಿ ಸಹಾಯ ಮಾಡಬೇಕು ಎಂಬುದನ್ನು ಚರ್ಚಿಸುತ್ತೇವೆ. ಇದನ್ನು ಸರ್ಕಾರದ ಗಮನಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

Home add -Advt

ವರದಿ ಬಂದ ಮೇಲೆ ದುರಂತದಲ್ಲಿ ಯಾರದು ತಪ್ಪು ಎಂಬುದು ಗೊತ್ತಾಗುತ್ತದೆ. ಆಗ ಅವರನ್ನು ಹೊಣೆಗಾರರು‌ ಮಾಡಬೇಕಾಗುತ್ತದೆ. ಸದ್ಯಕ್ಕೆ ಚಿಕಿತ್ಸೆ, ಮನೆ ಹಾನಿ ಸೇರಿ ಎಲ್ಲವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚರ್ಚಿಸಿ, ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇವೆ. ಇನ್ನು ಬೆಳಗಾವಿಯಲ್ಲಿ ಈ ರೀತಿ ಬಹಳಷ್ಟು ಬಡವರು ತಗಡಿನ ಶೆಡ್ಡಿನ ಮನೆಯಲ್ಲಿ ವಾಸವಿದ್ದಾರೆ. ಇವರಿಗೆ ಆಧ್ಯತೆ ಮೇರೆಗೆ ಮನೆಗಳನ್ನು ಮಂಜೂರು ಮಾಡಬೇಕಿದೆ. ಜೊತೆಗೆ ಇವರನ್ನು ಗುರುತಿಸಿ, ಅವರಿಗೆ ಮನೆಗಳನ್ನು ಪ್ರತ್ಯೇಕವಾಗಿ ಮೀಸಲಿಟ್ಟರೆ, ಇಂಥ ಅವಘಡಗಳನ್ನು ತಪ್ಪಿಸಬಹುದು ಎಂದರು.

ಈಗಾಗಲೇ ಪ್ರತಿ ಜಿಲ್ಲೆಗೆ 50 ಸಾವಿರ ಸೈಟ್ ಕೊಡುವ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತರುತ್ತಿದೆ. ಆದರೆ, ಆ ಜಾಗಗಳಿಗೆ ಇವರು ಹೋಗುವುದಿಲ್ಲ. ಹಾಗಾಗಿ, ಅವರ ಸ್ವಂತ ಜಾಗದಲ್ಲೆ ಶೆಡ್ ನಲ್ಲಿ ವಾಸಿಸುತ್ತಿರುವ ಇಂತಹ ಕುಟುಂಬಗಳಿಗೆ ಮನೆ ಕಟ್ಟಿಸಿಕೊಡಲು ಅವಕಾಶ ನೀಡಲಾಗುತ್ತದೆ. ಜೊತೆಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಯಾವುದೇ ಸುರಕ್ಷತೆ ಇಲ್ಲದ, ಶೆಡ್ಡಿನಲ್ಲಿ ವಾಸ ಮಾಡುವ ಕುಟುಂಬಗಳಿಗೆ ಮನೆ ಕಟ್ಟಿಸಿಕೊಡಲು ಮೊದಲ ಪ್ರಾಧಾನ್ಯತೆ ನೀಡುವಂತೆ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸತೀಶ ಜಾರಕಿಹೊಳಿ ಭರವಸೆ ನೀಡಿದರು. 

ಈ ವೇಳೆ ಶಾಸಕ ಆಸೀಫ್ ಸೇಠ್, ಮೇಯರ್ ಪ್ರೀತಿ ಕಾಮಕರ, ಉಪ ಮೇಯರ್ ಹನುಮಂತ ಕೊಂಗಾಲಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಸೇರಿದಂತೆ ಮತ್ತಿತರರು ಇದ್ದರು. 

Related Articles

Back to top button