ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಣ್ಣು ಪಂಚೇಂದ್ರಿಯಗಳಲ್ಲೇ ಸರ್ವಶ್ರೇಷ್ಠ. ಆದರೆ ವಯಸ್ಸಾದ ನಂತರ ಶರೀರದಲ್ಲಾಗುವ ಕೆಲವೊಂದು ಬದಲಾವಣೆಗಳಿಂದ ಮೋತಿಬಿಂದು ಹಾಗೂ ಇನ್ನಿತರೆ ಸಮಸ್ಯೆಗಳು ಉದ್ಭವಿಸುತ್ತವೆ. ನಿಯಮಿತ ತಪಾಸಣೆ, ಪೌಷ್ಟಿಕ ಆಹಾರ ಸೇವನೆಯಿಂದ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ. ಎಸ್.ಸಿ. ಧಾರವಾಡ ಹೇಳಿದರು.
ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮದ ಸಹಭಾಗಿತ್ವದಲ್ಲಿ ನಡೆದ ಉಚಿತ ಮೋತಿ ಬಿಂದು ಶಸ್ತ್ರಚಿಕಿತ್ಸಾ ಶಿಬಿರವನ್ನುದ್ದೇಶಿಸಿ ಅವರು ಮಾತನಾಡಿದರು.
ಉಚಗಾಂವ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಸುಮಾರು ೪೫ಕ್ಕೂ ಹೆಚ್ಚು ನಾಗರಿಕರಿಗೆ ಮೋತಿಬಿಂದು ತಪಾಸಣೆ ಮಾಡಲಾಯಿತು. ಅದರಲ್ಲಿ ಮೋತಿಬಿಂದು ಶಸ್ತ್ರಚಿಕಿತ್ಸೆಯ ಅವಶ್ಯಕತೆ ಕಂಡು ಬಂದ ೬ ಜನರನ್ನು ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವಾಹನದಲ್ಲಿ ಉಚಿತವಾಗಿ ಕರೆತಂದು ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ನೇತ್ರ ತಜ್ಞರಾದ ಡಾ.ಪದ್ಮಜಾ ಹಂಜಿ, ಅಡಿವೆಪ್ಪಾ ಪರಾಯಿ ನೇತ್ರ ಶಸ್ತ್ರಚಿಕಿತ್ಸೆ ಕೈಗೊಂಡರು