Latest

ಉಪ ರಾಷ್ಟ್ರಪತಿ ಭೇಟಿ; ಭದ್ರತಾ ವ್ಯವಸ್ಥೆ ಪರಿಶೀಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಭಾರತದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಮಾ.೧೮ ರಂದು ನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗದ ಅಧಿಕಾರಿಗಳು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಐಬಿ ಸಹಾಯಕ ನಿರ್ದೇಶಕ ಶಂಕರ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಭೆ ನಡೆಸಲಾಯಿತು.
ವಿಮಾನ ನಿಲುಗಡೆ, ಇಂಧನ ಮರುಪೂರಣ, ಭದ್ರತಾ ಸಿಬ್ಬಂದಿ ನಿಯೋಜನೆ ಹಾಗೂ ಅಗ್ನಿಶಾಮಕ ದಳದ ಪೂರ್ವಸಿದ್ಧತೆಯ ಬಗ್ಗೆ ಮಾಹಿತಿ ಪಡೆಯಲಾಯಿತು. ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಆಸ್ಪತ್ರೆಯಲ್ಲಿ ವಿಶೇಷ ವಾರ್ಡ ನಿರ್ಮಾಣ, ಆಹಾರ ಮತ್ತು ಅಲ್ಪೋಪಹಾರ ಪರಿಶೀಲನೆಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ನಿಯಂತ್ರಣಾಧಿಕಾರಿಗಳ ತಂಡ ರಚಿಸುವಂತೆ ನಿರ್ದೇಶನ ನೀಡಿದರು.
ಉಪ ರಾಷ್ಟ್ರಪತಿಗಳು ಆಗಮಿಸಿದಾಗ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಟಿಯುವರೆಗೆ ಸಂಚಾರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದರು. ನಂತರ ಘಟಿಕೋತ್ಸವ ಸಮಾರಂಭ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣಕ್ಕೆ ಭೇಟಿ ನೀಡಿದ ತಂಡ ವೇದಿಕೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿತು.
ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ ಕುಮಾರ, ಡಿಸಿಪಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜೇಂದ್ರ ಕೆ.ವಿ., ವಾಯುಪಡೆ ಅಧಿಕಾರಿಗಳು, ವಿಮಾನ ನಿಲ್ದಾಣದ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button