Latest

ಬಿಜೆಪಿ ಪ್ರಚಾರಕ್ಕೆ ಗಣ್ಯರ ದಂಡು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಏ.12 ರಿಂದ 18 ರವರೆಗೆ ಜಿಲ್ಲೆಗೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಈರಣ್ಣ ಕಡಾಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಏ.12 ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಗೇವಾಡಿ ಹಾಗೂ ಸವದತ್ತಿಯಲ್ಲಿ ನಟಿ ತಾರಾ ಪ್ರಚಾರ ನಡೆಸಲಿದ್ದಾರೆ. ಏ.13 ರಂದು ಬೆಳಗ್ಗೆ 10 ಗಂಟೆಗೆ ಗೋಕಾಕದ ವಾಲ್ಮೀಕಿ ಮೈದಾನದಲ್ಲಿ ಬಹಿರಂಗ ಸಭೆ ಹಾಗೂ ಮಧ್ಯಾಹ್ನ 12 ಬೈಲಹೊಂಗಲದಲ್ಲಿ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಏ.14 ರಂದು ಸಂಜೆ 4ಗಂಟೆಗೆ ಬೆಳಗಾವಿಯ ಅಂಗಡಿ ಕಾಲೇಜಿನಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಭೆ ಹಾಗೂ ಸಂವಾದದಲ್ಲಿ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಭಾಗಿಯಾಗುವವರು. ಏ.17 ರಂದು ಬೆಳಗಾವಿಯ ಶಹಾಪುರ ಮಾಲಿನಿ ಮೈದಾನದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏ.18 ರಂದು ಚಿಕ್ಕೋಡಿ ಪಟ್ಟಣದಲ್ಲಿ ನಡೆಯುವ ಬಿಜೆಪಿ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವರು ಎಂದು ತಿಳಿಸಿದರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಮುಂಬೈ ಕರ್ನಾಟಕ 7 ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಆರು ಸ್ಥಾನ ಬಿಜೆಪಿ ಗೆದ್ದಿತ್ತು. ಚಿಕ್ಕೋಡಿಯಲ್ಲಿ 3000 ಮತಗಳ ಕಡಿಮೆ ಅಂತರದಲ್ಲಿ ಬಿಜೆಪಿ ಸೋಲು ಕಂಡಿತ್ತು. ಆದರೆ, ಈ ಬಾರಿ ಮುಂಬೈ ಕರ್ನಾಟಕದ ಏಳು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ‌ ಅನಿಲ‌ ಬೆನಕೆ, ಬಿಜೆಪಿ ಮುಖಂಡರಾದ ಎಂ.ಬಿ.‌ಝಿರಲಿ, ರಾಜೇಂದ್ರ ಹರಕುಣಿ, ನ್ಯಾಯವಾದಿ ಬಸವರಾಜ ರೊಟ್ಟಿ ಮತ್ತಿತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button